ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, ಮಿಜಾರು ವತಿಯಿಂದ ಉಚಿತ ಆರೋಗ್ಯ ಮಾಹಿತಿ ಹಾಗೂ ಚಿಕಿತ್ಸಾ ಶಿಬಿರ ಮತ್ತು ಆಳ್ವಾಸ್ ಹೆಲ್ತ್ ಸೆಂಟರ್, ಮೂಡುಬಿದಿರೆ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಅಧ್ಯಕ್ಷ ಸೋಮನಾಥ ಶಾಂತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಇಂತಹ ಉಚಿತ ಆರೋಗ್ಯ ಶಿಬಿರಗಳು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಯುವವಾಹಿನಿಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭ ಹಾರೈಸಿದರು.
ಪ್ರಸಾದ್ ನೇತ್ರಾಲಯದ ಡಾ. ರಶ್ಮಿತಾ ಸಿ.ಎನ್. ನೇತ್ರ ಆರೋಗ್ಯದ ಮಹತ್ವವನ್ನು ವಿವರಿಸಿದರೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಡಾ. ಸುಧಾಮತಿ ಹೋಮಿಯೋಪಥಿ ಚಿಕಿತ್ಸಾ ಪದ್ಧತಿಯ ಕುರಿತು ಮಾಹಿತಿ ನೀಡಿದರು. ಡಾ. ಅರುಣ್ ರಕ್ತದಾನದ ಅಗತ್ಯತೆ ಹಾಗೂ ಅದರ ಮಹತ್ವವನ್ನು ವಿವರಿಸಿ ಸಾರ್ವಜನಿಕರು ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು. ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾತನಾಡಿ, ಮಳೆಗಾಲದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರ ಆರೋಗ್ಯ ಕಾಪಾಡಲು ಬಹಳ ಸಹಕಾರಿಯಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಆರೋಗ್ಯ ಸಂಚಾಲಕ ಲಕ್ಷಣ್ ಪೂಜಾರಿ, ಉಪಾಧ್ಯಕ್ಷ ಸುರೇಂದ್ರ ಪಿದಾಮಾಲೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ. ಸುಶೀಕ್ಷಿತಾ, ಡಾ. ಕಲ್ಪನಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ನೇತ್ರ ತಪಾಸಣೆ, ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ ಹಾಗೂ ರಕ್ತದಾನ ಶಿಬಿರದ ಸೌಲಭ್ಯವನ್ನು ಪಡೆದುಕೊಂಡರು.


