ಮಂಗಳೂರು : ಯುವವಾಹಿನಿ ಸಂಸ್ಥೆಯು ತನ್ನ ಸಂಘಟನಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಮೌಲ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರಂತರವಾಗಿ ಕೈಜೋಡಿಸುತ್ತಿದ್ದು, ಶೈಕ್ಷಣಿಕ ಪ್ರೋತ್ಸಾಹ, ಸೇವಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಯುವಕರಲ್ಲಿ ಸಾಮಾಜಿಕ ಹೊಣೆಗಾರಿಕೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಭಾರತೀಯ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ತಿಳಿಸಿದ್ದಾರೆ.
ಅವರು ದಿನಾಂಕ 27.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ ಯುವವಾಹಿನಿ (ರಿ) ಮಂಗಳೂರು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾನಿಧಿ ಯೋಜನೆಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳನ್ನು ಒದಗಿಸುವುದರ ಜೊತೆಗೆ, ಸಮಾಜದ ವಿವಿಧ ವರ್ಗಗಳೊಂದಿಗೆ ಸಂಪರ್ಕ ಸಾಧಿಸಿ ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಕಾರ್ಯವನ್ನು ಯುವವಾಹಿನಿ ನಿರಂತರವಾಗಿ ನಡೆಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಕಿರಣ್ ಕೋಡಿಕಲ್ ಮಾತನಾಡಿ, ಯುವವಾಹಿನಿ ಸಂಸ್ಥೆಯ ಸಂಘಟನಾ ಕಾರ್ಯವೈಖರಿಯಲ್ಲಿ ಸಮಯ ಪಾಲನೆ ಮತ್ತು ಶಿಸ್ತು ಪ್ರಮುಖ ಸ್ಥಾನ ಪಡೆದಿದ್ದು, ಪ್ರತಿಯೊಂದು ಕಾರ್ಯಕ್ರಮವೂ ನಿಗದಿತ ವೇಳಾಪಟ್ಟಿಯಂತೆ ಸುಸೂತ್ರವಾಗಿ ನಡೆಯುವುದು ಸಂಸ್ಥೆಯ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ. ಯುವಕರಲ್ಲಿ ಸಮಯದ ಮೌಲ್ಯ ಹಾಗೂ ಶಿಸ್ತುಬದ್ಧ ಬದುಕಿನ ಅರಿವು ಮೂಡಿಸುವಲ್ಲಿ ಯುವವಾಹಿನಿಯ ಕ್ರಮಗಳು ಮಾದರಿಯಾಗಿದೆ ಎಂದು ಹೇಳಿದರು.

2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಗೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು. ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿ ಮಾತನಾಡಿದ ಹರೀಶ್ ಕೆ. ಸುವರ್ಣ, ಹಿರಿಯರ ಮಾರ್ಗದರ್ಶನ ಮತ್ತು ಸದಸ್ಯರ ಸಹಕಾರದೊಂದಿಗೆ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು. ನಿಕಟಪೂರ್ವ ಅಧ್ಯಕ್ಷರಾದ ನಾಗೇಶ್ ಅಮೀನ್ ಮುಲ್ಲಕಾಡು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್, ಆಯ್ಕೆ ಸಮಿತಿಯ ಸಂಚಾಲಕರಾದ ನಾಗೇಶ್ ಅಮೀನ್ ಮುಲ್ಲಕಾಡು, ಕಾರ್ಯದರ್ಶಿ ಯಶವಂತ್ ಪೂಜಾರಿ, ನೂತನ ಅಧ್ಯಕ್ಷರಾದ ಹರೀಶ್ ಕೆ. ಸುವರ್ಣ, ಯುವಸಿಂಚನ ಕಾರ್ಯನಿರ್ವಾಹಕ ಸಂಪಾದಕರಾದ ಹರೀಶ್ ವಿ. ಪಚ್ಚನಾಡಿ, ಡಾಕ್ಟರೇಟ್ ಪದವಿ ಪಡೆದ ಘಟಕದ ಸದಸ್ಯೆ ಭಾರತಿ, ಸ್ಕೌಟ್ಸ್ ಅಂಡ್ ಗೈಡ್ಸ್ ಸಾಧಕಿ ಪೂರ್ಣಿಮಾ ಅವರನ್ನು ಅಭಿನಂದಿಸಲಾಯಿತು.

ಸಮಾರಂಭದ ಮೊದಲು ಭಜನೆ, ಗುರುಪೂಜೆ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಿತು. ಕಾರ್ಯದರ್ಶಿ ಯಶವಂತ್ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. ನೂತನ ಕಾರ್ಯದರ್ಶಿ ಉಷಾ. ಕೆ. ಧನ್ಯವಾದ ಸಮರ್ಪಣೆ ಮಾಡಿದರು. ಘಟಕದ ಸದಸ್ಯರಾದ ಸತೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು.


