ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 85 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಘಟಕದ ಸಕ್ರಿಯ ಸದಸ್ಯರ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಒಟ್ಟು 12 ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಶಿವಗಿರಿ ಯಾತ್ರೆಯಲ್ಲಿ ಭಾಗವಹಿಸಿದ್ದ ಸದಸ್ಯರು ತಮ್ಮ ಅನುಭವ ಮತ್ತು ಅನಿಸಿಕೆಗಳನ್ನು ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಕೋಶಾಧಿಕಾರಿ ಶಶಿಧರ ಕಿನ್ನಿಮಜಲು ಅವರು ಮಾತನಾಡಿ, ಯುವವಾಹಿನಿಯ ಸಮಾಜಮುಖಿ ಹಾಗೂ ಸಂಘಟನಾ ಚಟುವಟಿಕೆಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಅಲೆಕ್ಕಾಡಿ, ಮಾಜಿ ಅಧ್ಯಕ್ಷ ಎನ್.ಎಸ್.ಡಿ. ವಿಠಲದಾಸ್ ಹಾಗೂ ಯುವವಾಹಿನಿ ಸುಳ್ಯ ಘಟಕದ ಕಾರ್ಯದರ್ಶಿ ರಂಜಿತ್ ಕಲ್ಲೋಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ವಹಿಸಿದ್ದರು. ಮಾಜಿ ಅಧ್ಯಕ್ಷ ಹರೀಶ್ ಕಾವಿನಮೂಲೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಚಂದ್ರಶೇಖರ್ ಹೈದಂಗೂರು ಅವರು ನಿರೂಪಿಸಿದರು.
ಕುಟುಂಬ ಸದಸ್ಯರ ಸಮ್ಮಿಲನ, ವಿದ್ಯಾರ್ಥಿಗಳ ಸಾಧನೆಗೆ ಗೌರವ ಹಾಗೂ ಸಂಘಟನೆಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.


