ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ ಬಾಲ ಕಾರ್ಮಿಕ ಪದ್ಧತಿ ತಡೆಗೆ ಸಂಬಂಧಿಸಿದ ಕಾನೂನುಗಳ ಕುರಿತು ಮಾಹಿತಿ ನೀಡಿದರು. ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದು ಕಾನೂನುಬಾಹಿರವಾಗಿದ್ದು, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು. 14 ರಿಂದ 18 ವರ್ಷ ವಯಸ್ಸಿನ ಕಿಶೋರರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ತೊಡಗಿಸುವುದಕ್ಕೂ ಅವಕಾಶವಿಲ್ಲ. ಕುಟುಂಬದ ಸ್ವಂತ ಕೆಲಸಗಳಲ್ಲಿ ಸಹಕರಿಸಬಹುದಾದರೂ, ಅವರ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳು ಅಥವಾ ಶೋಷಣೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ. ಅಲ್ಲದೆ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ನ 24×7 ಸೇವೆಯನ್ನೂ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಿ, ತಮ್ಮ ಸುತ್ತಮುತ್ತಲಿನ ಜನರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಸಹಕರಿಸಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಅರೋಲಿನ್ ಡಿ’ಸೋಜ ಅವರನ್ನು ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಗೌರವಿಸಲಾಯಿತು. ಘಟಕದ ಸದಸ್ಯ ಸತೀಶ್ ಜಿ.ಪಿ. ಧನ್ಯವಾದ ಸಲ್ಲಿಸಿದರು. ಸಭೆಯಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.


