ಉಪ್ಪಿನಂಗಡಿ, ಜೂನ್ 21: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ, ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಭಾಗಿತ್ವದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ “ಮರ ಬೆಳೆಸಿ – ಭವಿಷ್ಯ ಉಳಿಸಿ” ಅಭಿಯಾನವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಕ್ರೀಡಾಂಗಣದ ಸುತ್ತಮುತ್ತ ವಿವಿಧ ಬೆಲೆಬಾಳುವ ಮರಗಳು ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು, ಅವುಗಳ ಪೋಷಣೆಯ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿಗೆ ಹಸ್ತಾಂತರಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಘಟಕದ ಗೌರವ ಸಲಹೆಗಾರ ವರದರಾಜ್ ಎಂ. ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು. ಅರಣ್ಯ ಇಲಾಖೆಯ ಅರಣ್ಯ ರಕ್ಷಕರಾದ ವಿನಯಕುಮಾರ್ ಅವರು ಉಚಿತವಾಗಿ ಗಿಡಗಳನ್ನು ಒದಗಿಸಿ ಮಾತನಾಡಿ, ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿಯೂ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವೀಂದ್ರ ಪಟಾರ್ತಿ, ಶಿಕ್ಷಕರಾದ ಮನೋಹರ್ ಹಾಗೂ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ಸಮಿತಿ ಸದಸ್ಯ ದೇವಪ್ಪ ಪೂಜಾರಿ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿ, ಯುವವಾಹಿನಿಯ ಕಾರ್ಯವನ್ನು ಶ್ಲಾಘಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಸಮಾಜ ಸೇವೆಯ ಮನೋಭಾವದಿಂದ ಇಂತಹ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರ ಸಹಕಾರವೇ ಕಾರಣವಾಗಿದ್ದು, ಮುಂದೆಯೂ ಸಂಘಟನೆಯ ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷ ಅಂಕಿತ್ ಎಂ.ಜೆ., ಸಮಾಜ ಸೇವಾ ನಿರ್ದೇಶಕ ವಸಂತ ಕಜೆ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು, ಸಮಾಜ ಬಂಧುಗಳು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯದರ್ಶಿ ರಮೇಶ್ ಎಸ್. ಸಾಂತ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


