ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.
ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಬೆಳ್ತಂಗಡಿ ಘಟಕವು ನಿರಂತರ ಸಮಾಜಮುಖಿ ಚಟುವಟಿಕೆಗಳ ಮೂಲಕ ಇತರ ಘಟಕಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಕ್ರಾಂತಿವೀರ ಮಂಜ ಬೈದ್ಯ ಸಂಸ್ಕರಣ ಸಮಿತಿಯ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ ಮಾತನಾಡಿ, ಸಂಘಟನೆಯಲ್ಲಿ ದೊರೆಯುವ ಹುದ್ದೆ ಗೌರವದ ಜೊತೆಗೆ ಜವಾಬ್ದಾರಿಯ ಸಂಕೇತವಾಗಿದ್ದು, ಪ್ರತಿಯೊಬ್ಬರೂ ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯಶವಂತ ಬೆಳ್ತಂಗಡಿ (ರಂಗ ಕಲಾವಿದ), ಶಿಶೀರ್ ಜೆ. ಸಾಲಿಯಾನ್ (ರಾಷ್ಟ್ರಮಟ್ಟದ ವಾಲಿಬಾಲ್ ಪಟು) ಹಾಗೂ ರಿತೀಶಾ ಎನ್. ಕರ್ಕೇರ (ಕಲಾವಿದೆ) ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಎಂಡೋಸಲ್ಫಾನ್ ಪೀಡಿತ ಕುಟುಂಬಕ್ಕೆ ಸಾಂತ್ವನ ನಿಧಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗೆ ವಿದ್ಯಾನಿಧಿಯನ್ನು ವಿತರಿಸಿ ಯುವವಾಹಿನಿಯ ಸಮಾಜಮುಖಿ ಬದ್ಧತೆಯನ್ನು ಪ್ರದರ್ಶಿಸಲಾಯಿತು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆ ವಹಿಸಿ, ತಮ್ಮ ಅವಧಿಯ ಕಾರ್ಯಗಳಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಲೀಲಾವತಿ ವಸಂತ ಪೂಜಾರಿ ಅವರು ಮುಂದಿನ ಅವಧಿಯಲ್ಲಿ ಎಲ್ಲರ ಸಹಕಾರದೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವುದಾಗಿ ತಿಳಿಸಿದರು. ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಶುಭ ಹಾರೈಸಿದರು.
ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್ ಪ್ರಸ್ತಾವನೆಗೈದರು. ಕಾರ್ಯದರ್ಶಿ ಮಧುರ ರಾಘವ್ ವಾರ್ಷಿಕ ವರದಿ ವಾಚಿಸಿದರು. ಆಯ್ಕೆ ಸಮಿತಿ ಸಂಚಾಲಕ ಸದಾಶಿವ ಪೂಜಾರಿ ಊರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಘಟಕದ ಸಲಹೆಗಾರ ಸುಧಾಮಣಿ ರಮಾನಂದ ಸಾಲಿಯಾನ್ ಹಾಗೂ ನಿರ್ದೇಶಕ ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಳೆಂಜಾ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಕಲಾವಿದೆ ರಿತೀಶಾ ಎನ್. ಕರ್ಕೇರ ಹಾಗೂ ತಂಡದವರಿಂದ ನಡೆದ ನೃತ್ಯ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿತ್ತು.


