ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು.

ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಜ್ಞಾನೇಶ್ ಶಿರ್ಲಾಲ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ಪರಿಚಯಿಸಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ರಾಜೇಶ್ ಎಸ್. ಬಲ್ಯ ಅವರು ನೂತನ ಕಾರ್ಯಕಾರಿ ಸಮಿತಿಯ ಕರ್ತವ್ಯ, ಜವಾಬ್ದಾರಿ, ಸಂಘಟನಾ ಶಿಸ್ತು, ಪರಿಣಾಮಕಾರಿ ನಾಯಕತ್ವ, ತಂಡದ ಸಮನ್ವಯ ಹಾಗೂ ಸಮಾಜಮುಖಿ ಸೇವಾ ಮನೋಭಾವದ ಕುರಿತು ಸಮಗ್ರ ತರಬೇತಿ ನೀಡಿ, ಯುವವಾಹಿನಿಯ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಪ್ರತಿಯೊಬ್ಬ ಪದಾಧಿಕಾರಿಯೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಅಧ್ಯಕ್ಷೀಯ ಭಾಷಣದಲ್ಲಿ ಲೀಲಾವತಿ ಪಣಕಜೆ ಅವರು, ನೂತನ ಕಾರ್ಯಕಾರಿ ಸಮಿತಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಯುವವಾಹಿನಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಜೊತೆ ಕಾರ್ಯದರ್ಶಿ ಆಕಾಶ್ ಹಾಗೂ ಸಂಘಟನಾ ಕಾರ್ಯದರ್ಶಿ ಜಿತಿಕ್ಷ ಮುಂಡಾಜೆ ನಿರೂಪಿಸಿದರು. ಕೊನೆಯಲ್ಲಿ ಶೈಲೇಶ್ ಅವರು ಉಪಸ್ಥಿತರಿದ್ದ ಎಲ್ಲಾ ಅತಿಥಿಗಳು, ಪದಾಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಿದರು.


