ಕಂಕನಾಡಿ, ಜುಲೈ 26: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ‘ಅಟಿದ ನೆಂಪು’ ಕಾರ್ಯಕ್ರಮವು ಜುಲೈ 26ರಂದು ಭಾನುವಾರ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಇಂಗ್ಲೀಷ್ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಾವತಿ ದೀಪ ಬೆಳಗಿಸಿ ಹಾಗೂ ಹಲಸಿನ ಹಣ್ಣನ್ನು ಸಾಂಪ್ರದಾಯಿಕವಾಗಿ ತುಂಡು ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆಟಿ ತಿಂಗಳಲ್ಲಿ ಹಿಂದಿನ ಕಾಲದಲ್ಲಿ ಸ್ಥಳೀಯವಾಗಿ ದೊರೆಯುವ ಸೊಪ್ಪು, ಹಣ್ಣು ಹಾಗೂ ನೈಸರ್ಗಿಕ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಜನರು ತಮ್ಮ ಜೀವನವನ್ನು ಸಾಗಿಸುತ್ತಿದ್ದರು. ಇಂದಿನ ಮಕ್ಕಳಿಗೂ ಆ ಸಂಪ್ರದಾಯ ಮತ್ತು ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಘಟಕದ ಮಾಜಿ ಅಧ್ಯಕ್ಷ ಪೃಥ್ವಿರಾಜ್ ಎಲ್ಲರನ್ನು ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಇಂದಿರಾ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ಆಟಿ ತಿಂಗಳ ಆಚರಣೆ, ಸಂಪ್ರದಾಯ ಮತ್ತು ಅದರ ಸಾಂಸ್ಕೃತಿಕ ಮಹತ್ವದ ಕುರಿತು ಮಾಹಿತಿ ನೀಡಿದರು. ಘಟಕದ ಅಧ್ಯಕ್ಷೆ ಸುರೇಖಾ ಮೋಹನ್ ಅವರು ಸದಸ್ಯರು ತಯಾರಿಸಿ ತಂದ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ವೇದಿಕೆ ಅಲಂಕಾರಕ್ಕೆ ಸಹಕರಿಸಿದ ಎಲ್ಲ ಸದಸ್ಯರನ್ನು ಹೂ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಸದಸ್ಯರಿಗಾಗಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಳಿಕ ಸದಸ್ಯರು ತಮ್ಮ ಮನೆಗಳಲ್ಲಿ ಆಟಿ ತಿಂಗಳಲ್ಲಿ ತಯಾರಿಸುವ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳನ್ನು ಹಂಚಿಕೊಂಡು, ಒಟ್ಟಾಗಿ ಸಹಭೋಜನ ನಡೆಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಘಟಕದ ಕಾರ್ಯದರ್ಶಿಯವರು ವಂದನಾರ್ಪಣೆ ಸಲ್ಲಿಸಿ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಿದರು.


