ಶಕ್ತಿನಗರ, ಜುಲೈ 26 : ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಇವರ ಜಂಟಿ ಆಶ್ರಯದಲ್ಲಿ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಮೌನ ನಮನ ಸಲ್ಲಿಸಲಾಯಿತು.

ಯುವವಾಹಿನಿ (ರಿ.) ಶಕ್ತಿನಗರ ಘಟಕದ ಅಧ್ಯಕ್ಷ ತೇಜಸ್ ವಿ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗುರು ಟ್ರಾವೆಲ್ಸ್ನ ಮಾಲಕರಾದ ರವೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾರದಾ ವಿದ್ಯಾಲಯದ ಮುಖ್ಯೋಪಾಧ್ಯಾಯ ದಯಾನಂದ ಕಟೀಲ್ ಅವರು ತುಳುನಾಡಿನ ಸಂಸ್ಕೃತಿ, ಆಚರಣೆ ಹಾಗೂ ಆಟಿಡೊಂಜಿ ದಿನದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿ ಗಮನ ಸೆಳೆದರು.

ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ಸುರೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಹರೀಶ್ ಪೂಜಾರಿ ಕೊಣಾಜೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿಯ ಅಧ್ಯಕ್ಷ ತುಕಾರಾಂ ಪೂಜಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಂಕನಾಡಿ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎ.ಎಸ್.ಐ.) ಸುಧಾಕರ್ ಅವರು ಇಂದಿನ ಯುವಜನರಲ್ಲಿ ಹೆಚ್ಚಾಗುತ್ತಿರುವ ದುಶ್ಚಟಗಳ ಕುರಿತು ಜಾಗೃತಿ ಮೂಡಿಸುವ ಮಾಹಿತಿ ನೀಡಿದರು. ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಲ್ಲಾ ಬಹುಮಾನಗಳಿಗೆ ಉದ್ಘಾಟಕರಾದ ರವೀಶ್ ಅವರು ಪ್ರಾಯೋಜಕರಾಗಿದ್ದರು.
ಕಾರ್ಯಕ್ರಮದಲ್ಲಿ ನಾಲ್ವರು ಹಿರಿಯರನ್ನು ಸನ್ಮಾನಿಸಿ, ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಆರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಯುವವಾಹಿನಿ ಶಕ್ತಿನಗರ ಘಟಕದ ನೂತನ ಸದಸ್ಯರನ್ನು ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸುವುದರೊಂದಿಗೆ ಸದಾ ನಿಮ್ಮೊಂದಿಗೆ ಇರುತ್ತೇನೆ ಎಂಬ ಭರವಸೆಯ ಮಾತುಗಳನ್ನು ಹೇಳಿದರು. ಸ್ಥಳೀಯ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ ಸಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಕಲಾವಿದರಿಗೆ, ಅನ್ನಸಂತರ್ಪಣೆ ವ್ಯವಸ್ಥೆ ಮಾಡಿದವರಿಗೆ ಹಾಗೂ ಅತಿಥಿ ಗಣ್ಯರಿಗೆ ಸಭಾಧ್ಯಕ್ಷರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿಯ ಕಾರ್ಯದರ್ಶಿ ಭಾರತಿ ಜಿ. ಅಮೀನ್ ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಪ್ರತೀಶ್ ಅವರು ನಿರೂಪಿಸಿದರು.


