ಮೂಡುಬಿದಿರೆ, ಆ. 1: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಮೂಡುಬಿದಿರೆಯಲ್ಲಿ ಆಗಸ್ಟ್ 1ರಂದು ‘ವಿದ್ಯಾರ್ಥಿ ಮನೋಹಿತ’ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಾಗಾರ–2 ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ಶಿಸ್ತುಬದ್ಧ ಜೀವನಶೈಲಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಸಂತೋಷ್ ನಾಯ್ಕ್ ಅವರು ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕಿ ಹಾಗೂ ಸರ್ಕಾರಿ ಶಾಲಾ ಶಿಕ್ಷಕಿ ಯೋಗಿತಾ ನವಾನಂದ ಮೂಡುಬಿದಿರೆ ಅವರು ಮಾತನಾಡಿ, ಮಾದಕ ವಸ್ತುಗಳ ದುರುಪಯೋಗವು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ನೆಮ್ಮದಿಯನ್ನು ಹಾಳುಮಾಡುವ ಗಂಭೀರ ಸಮಸ್ಯೆಯಾಗಿದೆ ಎಂದು ತಿಳಿಸಿದರು. ಮದ್ಯ, ಸಿಗರೇಟು, ತಂಬಾಕು ಸೇರಿದಂತೆ ಇತರ ಮಾದಕ ವಸ್ತುಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ವಿದ್ಯಾರ್ಥಿಗಳ ಶಿಕ್ಷಣ, ವ್ಯಕ್ತಿತ್ವ ಹಾಗೂ ಉಜ್ವಲ ಭವಿಷ್ಯಕ್ಕೂ ಧಕ್ಕೆ ತರುತ್ತವೆ ಎಂದು ಹೇಳಿದರು. ಉತ್ತಮ ಸ್ನೇಹ ಬಳಗ, ಸಕಾರಾತ್ಮಕ ಚಿಂತನೆ, ಸ್ವಯಂ ಶಿಸ್ತು ಹಾಗೂ ದೃಢ ಇಚ್ಛಾಶಕ್ತಿಯನ್ನು ಬೆಳೆಸಿಕೊಂಡರೆ ಯಾವುದೇ ದುಷ್ಟ ಚಟಗಳಿಂದ ದೂರವಿರಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಮಾತನಾಡಿ, ಕಾರ್ಯಾಗಾರದಲ್ಲಿ ತಿಳಿಸಲಾದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಾವುದೇ ಮಾದಕ ವ್ಯಸನ ಅಥವಾ ದುಷ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರವುಳ್ಳ, ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಶಕ್ತಿಯು ಸದ್ಗುಣ, ಶಿಸ್ತು ಮತ್ತು ಶಿಕ್ಷಣದ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಉತ್ತರ ಪಡೆದರು. ಮಾದಕ ವ್ಯಸನದ ದುಷ್ಪರಿಣಾಮಗಳು, ಅದರಿಂದ ದೂರವಿರುವ ಮಾರ್ಗಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡ ವಿದ್ಯಾರ್ಥಿಗಳು, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ತಮ್ಮಿಂದಾಗುವ ಸಹಕಾರ ನೀಡುವ ಸಂಕಲ್ಪ ವ್ಯಕ್ತಪಡಿಸಿದರು.


