ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿಯಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಥ್ರೆಡ್ ವಿಷನ್ ಸಂಸ್ಥೆಯ ಮಾಲಕರಾದ ನಾರಾಯಣಸ್ವಾಮಿ ಅವರು ಮಾತನಾಡಿ, ಛಲ, ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ತರಬೇತಿಯಲ್ಲಿ ಭಾಗವಹಿಸಿದವರು ಕಲಿತ ಕೌಶಲ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಅವರು ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಸಾಮರ್ಥ್ಯವನ್ನು ಗುರುತಿಸಿಕೊಂಡು “ನಾನು ಬೆಳೆಯಬೇಕು” ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು. ಸ್ವಾವಲಂಬನೆಯ ಮೂಲಕ ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದರು.
ಸೀಡಾಕ್ ಮಂಗಳೂರು ಉಪನಿರ್ದೇಶಕ ಶಿವಾನಂದ ಯೆಲಿಗಾರ್ ಅವರು ಮಾತನಾಡಿ, ಉದ್ಯಮ ಆರಂಭಿಸಲು ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲು ಸೀಡಾಕ್ ಸದಾ ಸಿದ್ಧವಿದ್ದು, ತರಬೇತಿ ಪಡೆದವರು ಧೈರ್ಯದಿಂದ ಉದ್ಯಮ ಕ್ಷೇತ್ರಕ್ಕೆ ಕಾಲಿಡಬೇಕು ಎಂದು ಹೇಳಿದರು. ಅಧ್ಯಕ್ಷೀಯ ಭಾಷಣ ಮಾಡಿದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು, ಹತ್ತು ದಿನಗಳ ತರಬೇತಿಯಲ್ಲಿ ಪಡೆದ ಜ್ಞಾನ ಹಾಗೂ ಕೌಶಲ್ಯವನ್ನು ಜೀವನದಲ್ಲಿ ಮತ್ತು ಉದ್ಯಮದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಆತ್ಮನಿರ್ಭರ ಬದುಕನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹತ್ತು ದಿನಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ತರಬೇತಿದಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಥ್ರೆಡ್ ವಿಷನ್ ಸಂಸ್ಥೆಯ ಮಾಲಕರಾದ ನಾರಾಯಣಸ್ವಾಮಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಸೀಡಾಕ್ ಮಂಗಳೂರು ಉಪನಿರ್ದೇಶಕ ಶಿವಾನಂದ ಯೆಲಿಗಾರ್ ಹಾಗೂ ಮಹಿಳಾ ಘಟಕದ ಕಾರ್ಯದರ್ಶಿ ಸೋನಿಯಾ ರಾಜ್ ಉಪಸ್ಥಿತರಿದ್ದರು.
ತರಬೇತುದಾರರಾದ ಪ್ರವೀಶ್ಯ ಅವರು ಸ್ವಾಗತಿಸಿ, ವಿದ್ಯಾ ಅವರು ಧನ್ಯವಾದ ಸಮರ್ಪಿಸಿದರು.


