ಕಂಕನಾಡಿ, ಆ. 4: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಯ (ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ) ಸಹಯೋಗದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (KSTA) ಭವನ, ಗೋರಿಗುಡ್ಡದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುಷ್ ಇಲಾಖೆಯ ಹೋಮಿಯೋಪತಿ ತಜ್ಞೆ ಡಾ. ಶ್ರೀ ದೇವಿ ವೆಂಕಟಾಪುರ ಅವರು, “ಹೋಮಿಯೋಪತಿ ಔಷಧಿಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಶಿಶುವಿನಿಂದ ಹಿಡಿದು ಎಲ್ಲಾ ವಯೋಮಾನದವರು ತಮ್ಮ ಇತರ ಚಿಕಿತ್ಸೆಗಳ ಜೊತೆಯಲ್ಲಿಯೇ ಹೋಮಿಯೋಪತಿ ಔಷಧಿಗಳನ್ನು ಸೇವಿಸಬಹುದಾಗಿದ್ದು, ರೋಗವನ್ನು ಮೂಲದಿಂದ ನಿವಾರಿಸುವ ಸಾಮರ್ಥ್ಯ ಈ ಚಿಕಿತ್ಸಾ ಪದ್ಧತಿಗಿದೆ” ಎಂದು ತಿಳಿಸಿದರು.
ಮತ್ತೋರ್ವ ಹೋಮಿಯೋಪತಿ ತಜ್ಞೆ ಡಾ. ಅನ್ನಪೂರ್ಣ ಭಂಡಾರಿ ಅವರು ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿಯೇ ಪ್ರೋಟೀನ್ಯುಕ್ತ ಆಹಾರ ನೀಡಿದರೆ ಅವರು ಆರೋಗ್ಯವಂತರಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಮಹಾ ನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯ ಸಂದೀಪ್ ಗರೋಡಿಯ ಅವರು ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿರುವ ಯುವವಾಹಿನಿ ಕಂಕನಾಡಿ ಘಟಕದ ಸೇವಾ ಕಾರ್ಯವನ್ನು ಶ್ಲಾಘಿಸಿದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಅವರು ಮಾತನಾಡಿ, ಯುವವಾಹಿನಿಯ 35 ಘಟಕಗಳು ತಮ್ಮ ವ್ಯಾಪ್ತಿಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯವಂತ ಹಾಗೂ ಸದೃಢ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಶ್ರಮಿಸುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಆಗಮಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಇಂದಿರಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಅಧ್ಯಕ್ಷೆ ಸುರೇಖಾ ಮೋಹನ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಧನುಷ್ ಹಾಗೂ ಕಾರ್ಯಕ್ರಮ ಸಂಚಾಲಕ ಮತ್ತು ಆರೋಗ್ಯ ನಿರ್ದೇಶಕ ರೋಹಿತ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷೆ ಸುರೇಖಾ ಮೋಹನ್ ಸ್ವಾಗತಿಸಿದರು. ದೇವಕಿ ಕಿಶೋರ್ ಪ್ರಾರ್ಥಿಸಿದರು. ಮೇಘಾ ಧನುಷ್ ಕಾರ್ಯಕ್ರಮ ನಿರೂಪಿಸಿದರು. ರೋಹಿತ್ ಕುಮಾರ್ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ನಡೆದ ಉಚಿತ ಆರೋಗ್ಯ ತಪಾಸಣೆ ಹಾಗೂ ಹೋಮಿಯೋಪತಿ ಚಿಕಿತ್ಸಾ ಶಿಬಿರದಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಭಾಗವಹಿಸಿ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಂಡರು.


