ಕುಪ್ಪೆಪದವು, ಆಗಸ್ಟ್ 09: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಕುಪ್ಪೆಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಘಟಕದ ಸದಸ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಮಾಜದ ಮುಖಂಡ ಉಮೇಶ್ ಪೂಜಾರಿ ಸೂರಲ್ಪಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಘಟಕದ ಮಾಜಿ ಅಧ್ಯಕ್ಷ ಅಜಯ್ ಅಮೀನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಒಂದು ವರ್ಷದ ಅವಧಿಯಲ್ಲಿ ಘಟಕವು ಕೈಗೊಂಡ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಾಧನೆಗಳ ಸವಿಸ್ತಾರ ವರದಿಯನ್ನು ಘಟಕದ ಕಾರ್ಯದರ್ಶಿ ಅಕ್ಷತಾ ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷ ಹಾಗೂ ಆಯ್ಕೆ ಸಮಿತಿಯ ಸಂಚಾಲಕರಾದ ಅಕ್ಷಿತ್ ಕುಮಾರ್ ಅವರು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರು ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಯುವವಾಹಿನಿ ಕುಪ್ಪೆಪದವು–ಎಡಪದವು ಘಟಕವು ಈ ಭಾಗದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉತ್ತಮ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯರನ್ನು ಸಂಘಟನೆಗೆ ಸೇರ್ಪಡೆಗೊಳಿಸಿ ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕಾರ್ಯ ನಡೆಯಲಿ ಎಂದು ಆಶಿಸಿದರು.

ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಗಂಗಾಧರ ಪೂಜಾರಿ ಎಡಪದವು ಅವರು ಮಾತನಾಡಿ, ಘಟಕದ ಅಭಿವೃದ್ಧಿಗೆ ಎಲ್ಲರ ಸಹಕಾರದೊಂದಿಗೆ ಶ್ರಮಿಸುವುದಾಗಿ ತಿಳಿಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿರಂಜನ್ ಬಜಪೆ ಅವರು ನೂತನ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ 18 ಮಂದಿ ನೂತನ ಸದಸ್ಯರು ಯುವವಾಹಿನಿಗೆ ಸೇರ್ಪಡೆಗೊಂಡರು.
ಸಮಾಜದ ಪರಂಪರೆಯ ಕುಲಕಸುಬಾದ ಮೂರ್ತೇಗಾರಿಕೆಯನ್ನು ತಮ್ಮ 21ನೇ ವಯಸ್ಸಿನಿಂದ ನಿರಂತರವಾಗಿ 42 ವರ್ಷಗಳ ಕಾಲ ಮಾಡಿಕೊಂಡು ಸಮಾಜಕ್ಕೆ ಮಾದರಿಯಾಗಿರುವ ಬಳ್ಳಾಜೆ ಪಲ್ಕೆ ನಿವಾಸಿ ಸುಂದರ ಪೂಜಾರಿ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಘಟಕದ ಅಧ್ಯಕ್ಷ ಶ್ರೀಧರ ಪೂಜಾರಿ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ವೇದಿಕೆಯಲ್ಲಿ ಘಟಕದ ಗೌರವ ಸಲಹೆಗಾರ ಸಂಜೀವ ಶ್ರೀನಿಕೇತನ ಹಾಗೂ ಘಟಕದ ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು.
ಘಟಕದ ಸದಸ್ಯರಾದ ಧನ್ಯಶ್ರೀ ಮುಗಿಲ ಹಾಗೂ ಬಿಂದಿಯ ಕಾರ್ಯಕ್ರಮ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿ ಸಂತೋಷ್ ಬೊಳಿಯ ಧನ್ಯವಾದ ಸಮರ್ಪಿಸಿದರು. ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ, ನೂತನ ಸದಸ್ಯರ ಸೇರ್ಪಡೆ, ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಸಾಧಕರಿಗೆ ಗೌರವ ಸಲ್ಲಿಕೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.


