ಮಂಗಳೂರು ಅಗಸ್ಟ್ 20 : ಬಾಲ್ಯದಲ್ಲಿಯೇ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹಾಗೂ ಭವಿಷ್ಯವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಲು ಅಗತ್ಯವಾದ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಬಾಲನ್ಯಾಯ ಮಂಡಳಿ (Juvenile Justice Board) ಸದಸ್ಯೆ ಸಚಿತ ನಂದಗೋಪಾಲ್ ಹೇಳಿದರು.

ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕುಂಪಲದ DKZP ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವ್ಯಕ್ತಿತ್ವ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಮೌಲ್ಯಗಳನ್ನು ಕೇವಲ ಹೇಳಿಕೊಡುವುದಕ್ಕಿಂತ ಅವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸುವುದು ಮುಖ್ಯ” ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ನಾಯಕತ್ವ ಗುಣಗಳು, ಜೀವನ ಮೌಲ್ಯಗಳು, ಮಕ್ಕಳ ಹಕ್ಕುಗಳು, ಸುರಕ್ಷತೆ ಹಾಗೂ ಶೈಕ್ಷಣಿಕ ಬೆಳವಣಿಗೆಯ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾರ್ಗದರ್ಶನ ನೀಡಿದರು.
ಮಕ್ಕಳ ಸುರಕ್ಷತೆಯ ಕುರಿತು ಸುರಕ್ಷಿತ ಸ್ಪರ್ಶ (Safe Touch) ಮತ್ತು ಅಸುರಕ್ಷಿತ ಸ್ಪರ್ಶ (Unsafe Touch) ಬಗ್ಗೆ ವಿದ್ಯಾರ್ಥಿಗಳಿಗೆ ವಯೋಸಹಜವಾಗಿ ಅರಿವು ಮೂಡಿಸಲಾಯಿತು. ಯಾರಾದರೂ ಅಸಹಜವಾಗಿ ಸ್ಪರ್ಶಿಸಿದರೆ, ಕಿರುಕುಳ ನೀಡಿದರೆ ಅಥವಾ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರೆ ಧೈರ್ಯವಾಗಿ “ಬೇಡ” ಎಂದು ಹೇಳಬೇಕು. ತಕ್ಷಣ ಪೋಷಕರು, ಶಿಕ್ಷಕರು ಅಥವಾ ನಂಬಿಕೆಯಿರುವ ಹಿರಿಯರೊಂದಿಗೆ ವಿಷಯವನ್ನು ಹಂಚಿಕೊಳ್ಳಬೇಕು. ಇಂತಹ ಸಂದರ್ಭಗಳಲ್ಲಿ ಭಯ ಅಥವಾ ನಾಚಿಕೆಯಿಂದ ಮೌನವಾಗಿರದೆ ಸಹಾಯ ಪಡೆಯಬೇಕು ಎಂದು ತಿಳಿಸಲಾಯಿತು.
ಅಗತ್ಯವಿದ್ದಲ್ಲಿ ಮಕ್ಕಳ ಸಹಾಯವಾಣಿ 1098 ಅನ್ನು ಸಂಪರ್ಕಿಸಬಹುದು ಎಂಬ ಮಾಹಿತಿಯನ್ನೂ ನೀಡಲಾಯಿತು. ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ನ್ನು ಜವಾಬ್ದಾರಿಯುತವಾಗಿ ಮತ್ತು ಮಿತವಾಗಿ ಬಳಸುವುದು, ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳದಿರುವುದು ಹಾಗೂ ಆನ್ಲೈನ್ನಲ್ಲಿ ಎದುರಾಗಬಹುದಾದ ಅಸುರಕ್ಷಿತ ಸಂದರ್ಭಗಳ ಬಗ್ಗೆ ಎಚ್ಚರಿಕೆ ವಹಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.
ಘಟಕದ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕಿ ಹರಿಣಿ ಧನ್ಯವಾದ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಲಘು ಉಪಹಾರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.


