ಕೆಂಜಾರು–ಕರಂಬಾರು ಅಗಸ್ಟ್ 30 : ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ಆಶ್ರಯದಲ್ಲಿ 8ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ–2026 ಕಾರ್ಯಕ್ರಮವು ಆಗಸ್ಟ್ 30ರಂದು ಶ್ರೀ ದೇವಿ ಭಜನಾ ಮಂದಿರದಲ್ಲಿ ಸಂಭ್ರಮ ಹಾಗೂ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವು ಪ್ರತಿಮಾ ಪಾಲನ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮಕ್ಕೆ ಸ್ಥಳಾವಕಾಶ ಒದಗಿಸಿ ಸಹಕರಿಸಿದ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಮಿತ್ರದಾಸ್ ಅಮೀನ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿಯ ವಿವಿಧ ಕಾರ್ಯಕ್ರಮಗಳಿಗೆ ನಿರಂತರವಾಗಿ ಬೆಂಬಲ ಹಾಗೂ ಪ್ರೋತ್ಸಾಹ ನೀಡುತ್ತಿರುವ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಕಾರವನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸಲಾಯಿತು.

ಘಟಕದ ಅಧ್ಯಕ್ಷರಾದ ಪ್ರಿತೇಶ್ ಅರ್ಬಿ ಅವರು ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಭಿಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ 2ನೇ ಉಪಾಧ್ಯಕ್ಷರು, ಕೆಂಜಾರು–ಕರಂಬಾರು ಘಟಕವು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿಯೂ ಘಟಕದ ವತಿಯಿಂದ ಇನ್ನಷ್ಟು ಸಮಾಜಮುಖಿ ಹಾಗೂ ಉತ್ತಮ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಹರ್ಷಿತಾ ಚೇತನ್ ಹಾಗೂ ಸಾಂಸ್ಕೃತಿಕ ನಿರ್ದೇಶಕರಾದ ಸೌಮ್ಯ ವಿನೋದ್ ಕರಂಬಾರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಪುಟಾಣಿ ಮಕ್ಕಳ ಕಣ್ಮನ ಸೆಳೆಯುವ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸ್ವಾತಿ ಸಂಜೀವ ಪೂಜಾರಿ ಹಾಗೂ ನಿಖಿತಾ ಎಂ.ಕೆ. ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಒಟ್ಟು ನಾಲ್ಕು ವಿಭಾಗಗಳಲ್ಲಿ 30ಕ್ಕೂ ಅಧಿಕ ಪುಟಾಣಿ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದರು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಯೊಂದು ಮಗುವಿಗೂ ಪ್ರೋತ್ಸಾಹಕ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರಾದ ವಿನೋದ್ ಅರ್ಬಿ ಹಾಗೂ ಜೀತೇಶ್ ನಿರೂಪಿಸಿದರು. ಘಟಕದ ಕಾರ್ಯದರ್ಶಿ ರಾಜೇಶ್ ಎಸ್. ಪೂಜಾರಿ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಘಟಕದ ಸಮಸ್ತ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸಕ್ರಿಯವಾಗಿ ಕೈಜೋಡಿಸಿ ಸಹಕರಿಸಿದರು.


