ಮಾಣಿ, ಸೆ. 14: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಚೌತಿ ಚಿತ್ತಾರ’ ಕಾರ್ಯಕ್ರಮವು ಲೋಕೇಶ್ ಬಂಗೇರ ಪಳ್ಳತ್ತಿರ ಅವರ ಮನೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕೇಶ್ ಬಂಗೇರ ಅವರು, ಹಿಂದಿನ ಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸುವ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ. ಇಂತಹ ವಿನೂತನ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದರೊಂದಿಗೆ ಅವುಗಳ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಹೇಳಿದರು.
ಯುವವಾಹಿನಿ (ರಿ.) ವಿಟ್ಲ ಘಟಕದ ಕಾರ್ಯದರ್ಶಿ ಧನಲಕ್ಷ್ಮಿ ರಾಜೇಶ್ ಅವರು ‘ಚೌತಿ ಚಿತ್ತಾರ’ದ ಉದ್ದೇಶವನ್ನು ವಿವರಿಸಿ, ಗಣಪತಿಯ ಸ್ವರೂಪ, ಗಣಪತಿ ಆರಾಧನೆಯ ಮಹತ್ವ, ತುಳಸಿ ಕಟ್ಟೆಯ ಬಳಿ ಗಣಪತಿಯನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಹಾಗೂ ಗಣಪತಿಗೆ ಸಲ್ಲಿಸುವ ಸ್ತುತಿ ಮತ್ತು ನೈವೇದ್ಯಗಳ ಕುರಿತು ಮಾಹಿತಿ ನೀಡಿದರು. ಯಾವುದೇ ಶುಭಕಾರ್ಯಕ್ಕೂ ಮುನ್ನ ಗಣಪತಿಗೆ ಮೊದಲ ಸ್ಥಾನ ನೀಡುವ ಸಂಪ್ರದಾಯದ ಹಿನ್ನೆಲೆ ಹಾಗೂ ಅದರಲ್ಲಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು.
ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪಡಾಜೆ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ನೋಡುವುದರಿಂದ ಇಂದಿನ ಪೀಳಿಗೆಗೆ ಅವುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಾಧ್ಯ. ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಹಾಗೂ ಸಂರಕ್ಷಣೆಯ ನಿಟ್ಟಿನಲ್ಲಿ ಯುವವಾಹಿನಿ ಘಟಕವು ಇಂತಹ ಕಾರ್ಯಕ್ರಮಗಳನ್ನು ಮುಂದುವರಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಅಧ್ಯಕ್ಷ ರಮೇಶ್ ಪೂಜಾರಿ ಮುಜಾಲ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಸುಜಿತ್ ಅಂಚನ್ ವಂದಿಸಿದರು.






