ಕೊಲ್ಯ, ಸೆ. 16: ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ಪಿಎಂ ಶ್ರೀ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಒಂಬತ್ತುಕೆರೆ, ಉಳ್ಳಾಲ ಇಲ್ಲಿನ ವಿದ್ಯಾರ್ಥಿಗಳಿಗೆ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರವು ಸೆ. 16ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಹಿನ್ನೆಲೆಯಲ್ಲಿ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಮೊಬೈಲ್ ಬಳಕೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಅವರು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್ ಅವರು ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಹಿರಿಯರನ್ನು ಗೌರವಿಸುವುದರ ಮಹತ್ವವನ್ನು ತಿಳಿಸಿದರು. ಉತ್ತಮ ಶಿಕ್ಷಣ ಪಡೆದು ಜವಾಬ್ದಾರಿಯುತ ನಾಗರಿಕರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಡಾ. ಅಪೂರ್ವ ಕೆಂಜಾರ್ ಅವರು ಮೊಬೈಲ್ನ ಅತಿಯಾದ ಬಳಕೆಯಿಂದ ದೇಹ ಹಾಗೂ ಮನಸ್ಸಿನ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಮೊಬೈಲ್ ಬಳಕೆಯ ಬದಲಾಗಿ ಕ್ರೀಡೆ, ಓದು ಹಾಗೂ ಇತರ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆಯೂ ವಿವರಿಸಿದರು.
ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ವಿಷಯಗಳಿಗೆ ಸಂಬಂಧಿಸಿದ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪರಿಣಾಮಕಾರಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು. ಒಟ್ಟು 72 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಶಿಕ್ಷಕ ವರ್ಗದವರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಯುವವಾಹಿನಿ (ರಿ.) ಕೊಲ್ಯ ಘಟಕದ ಸ್ಥಾಪಕ ಅಧ್ಯಕ್ಷ ಸುರೇಶ್ ಬಿಲ್ಲವ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು.






